ಮತ್ತೆ ಕೇಳಿದ ಹಾಡು, ಒಂದಿಷ್ಟು ಹಳೆಯ ನೆನಪು

February 23, 2009

ನಾನಾಗ ಒಂಭತ್ತನೇ ತರಗತಿಯಲ್ಲಿ ಓದುತ್ತಿದ್ದೆ. ಅದೇ ವೇಳೆ ಜೊತೆಗೊಬ್ಬ ಗೆಳೆಯನಿದ್ದ. ನನಗಿಂತ ಮೂರು ವರ್ಷ ದೊಡ್ಡವ. ನನ್ನೂರಿನ ಕಾಲೇಜಿನಲ್ಲೇ ಎರಡನೇ ಪಿಯುಸಿ ಓದುತ್ತಿದ್ದ. ನಮ್ಮಲ್ಲಿ ಹೈಸ್ಕೂಲು, ಕಾಲೇಜು ಎಲ್ಲ ಒಟ್ಟಿಗೆ ಇದ್ದಿದ್ದರಿಂದ ದಿನ ಒಟ್ಟಿಗೆ ಬೆರೆಯುವಂತ ಅವಕಾಶ. ಸ್ಕೂಲಿನಲ್ಲಿ ಅಷ್ಟೇನು ಭೇಟಿಯಾಗದಿದ್ದರೂ, ನಾಲ್ಕರ ನಂತರ ತಪ್ಪದೇ ಸೇರುತ್ತಿದ್ದೆವು.  ಮಾಸ್ಟರ್, ಮೇಡಮ್ಮುಗಳೆಲ್ಲ ಈಚೆ ಹೊರಟು, ಗೇಟಿಗೆ ಬೀಗ ಬಿದ್ದದ್ದೇ ತಡ ಅದರ ಮೇಲೆ ನೆಗೆಯುತ್ತಾ ಮೈದಾನ ಹೊಕ್ಕವೆಂದರೇ ಅಲ್ಲಿಂದ ಹೊರಗೆ ಬರುತ್ತಿದ್ದುದು ಕತ್ತಲಾದ ಮೇಲೆ.

ಪ್ರತಿ ಸಂಜೆ ಅಲ್ಲಿ ಕ್ರಿಕೆಟ್ ಮ್ಯಾಚ್ ನಡೆಯುತ್ತಿತ್ತು. ನಮ್ಮ ಪಾಲಿಗೆ ಭಾರೀ ಬೆಟ್ಟಿಂಗಿನ ತಾಣ. ಗೆಳೆಯ ಊರಿನಲ್ಲೇ ಒಳ್ಳೆಯ ಕ್ರಿಕೆಟ್ ಆಟಗಾರನಾಗಿದ್ದ. ಇದ್ದಬದ್ದವರನ್ನೆಲ್ಲ ಒಟ್ಟುಗೂಡಿಸಿ ಸಾಮರ್ಥ್ಯಕ್ಕೆ ಅನುಸಾರಗಾಗಿ ತಂಡ ಹಂಚಲಾಗುತ್ತಿತ್ತು. ಕೆಲವೊಮ್ಮೆ ದೊಡ್ಡವರೆಲ್ಲ ಸೇರಿಕೊಂಡಾಗ ನನ್ನಂತ ಹುಡುಗರಿಗೆ ಕೋಕ್.

ಆರು ಓವರುಗಳಿಂದ ಹೆಚ್ಚೆಂದರೆ ಹತ್ತು-ಹನ್ನೆರಡು ಓವರುಗಳ ಪಂದ್ಯ. (ಈಗಿನ ಟ್ವೆಂಟಿ೨೦ ಹಾಗೇ) ದಿನಕ್ಕೆ ಮೂರು-ನಾಲ್ಕು ಪಂದ್ಯಗಳು ನಡೆಯುತ್ತಿತ್ತು. ಪ್ರತಿ ಮ್ಯಾಚಿಗೂ ಐವತ್ತು-ನೂರು ರೂಪಾಯಿಗಳಷ್ಟು ಬೆಟ್ಟಿಂಗ್. ಗೆಳೆಯ ಒಳ್ಳೆಯ ಆಟಗಾರ. ಅವನ ಸಾಮರ್ಥ್ಯ ನಂಬಿಕೊಂಡೇ ನಮ್ಮೆಲ್ಲರ ಹಣ ಹೂಡಿಕೆಯಾಗುತ್ತಿತ್ತು. ಲಾಭ ಅಲ್ಲದಿದ್ದರೂ ನಷ್ಟವಾಗಿದ್ದು ಮಾತ್ರ ಗೊತ್ತಿಲ್ಲ. ಅವತ್ತಿನ ಖರ್ಚುಗಳಿಗಂತೂ ಮೋಸವಾಗುತ್ತಿರಲಿಲ್ಲ.

ಆಟ ಮುಗಿದ ಕೂಡಲೇ ಊರ ಒಳಗೊಂದು ಸುತ್ತು. ರಾಮಮಂದಿರದ ಒಳಗೊಮ್ಮೆ ಹೋಗಿ ರಾಮ ಇದ್ದಾನೆಯೇ ಅಂತ ನೋಡಿಕೊಂಡು ಬರುವುದು ಕಡ್ಡಾಯ. ಅದಾದ ಬಳಿಕ ಊರಿನ ಏಕೈಕ ಪಾನಿಪೂರಿ ಅಂಗಡಿಯ ಮೇಲೆ ನಮ್ಮ ಠಿಕಾಣಿ. ಖಾಯಂ ಗಿರಾಕಿಗಳಾದ್ದರಿಂದ ಸ್ವಲ್ಪ ಹೆಚ್ಚಿಗೆ ಈರುಳ್ಳಿ ಹಾಕಿ, ಮೀಡಿಯಂ ಖಾರ ಸೇರಿಸಿ ಕೊಡಬೇಕು ಅನ್ನುವುದು ಅಲಿಖಿತ ನಿಯಮ.

ಹಾಗೇ ಬಸ್ ಸ್ಟ್ಯಾಂಡಿನ ಅರಳೀಕಟ್ಟೆ ಹತ್ತಿರಕೊಮ್ಮೆ ಬಂದು, ಆಸ್ಪತ್ರೆಗೂ ಒಂದು ಭೇಟಿ ಕೊಡುವ ಹೊತ್ತಿಗೆ ಸಂಜೆ ಏಳರ ಸಮಯ. ಹಾಗೇ ಅಂಗಡಿಯತ್ತ ಹೋದವರೇ ಎರಡು ಲೀಟರ್ ಕಡಲೇಪುರಿಯೊಂದಿಗೆ ಒಂದಿಷ್ಟು ಖಾರ ಬೂಂದಿ ಬೆರೆಸಿಕೊಂಡು, ಜೊತೆಗೆ ಮೆಣಸಿನಕಾಯಿ ಬಜ್ಜಿ ಹಿಡಿದು ಮತ್ತೆ ಕಾಲೇಜಿನ ಗೇಟು ಹಾರಿದವೆಂದರೆ ಇನ್ನು ಈಚೆ ಬರುವುದು ರಾತ್ರಿ ಒಂಭತ್ತಕ್ಕೆ. ಈ ಮಧ್ಯೆ ನಮ್ಮ ಮಾತಿಗೆ ಬಾರದ ವಿಷಯವಿಲ್ಲ.

ಆಗ ನಮ್ಮೂರಲ್ಲಿ ವರ್ಷಕ್ಕೊಮ್ಮೆ ಗೋಲಿ ಸೀಜನ್ನು ಅಂತ ಬರುತ್ತಿತ್ತು. ಆಗಲಂತೂ ಸಾಕ್ಷಾತ್ ಲಕ್ಷ್ಮಿ ಒಲಿದಂಥ ಅನುಭವ. ಸೀಜನ್ನು ಇರುವ ತನಕ ಸಂಪಾದನೆಗೆ ಕುತ್ತಿಲ್ಲ.

ಹೀಗಿರುವ ನಮಗೆ ಒಮ್ಮೆ ವಾಕ್ ಮನ್ ಕೊಂಡುಕೊಳ್ಳುವ ಯೋಗ ಸಹ ಕೂಡಿಬಂತು. ಆದರೆ ಕೇಳೋದಕ್ಕೆ ಮಾತ್ರ ಒಂದೂ ಕ್ಯಾಸೆಟ್ಟುಗಳಿರದೇ ತೊಂದರೆಯಾಗಿತ್ತು. ಅದೇ ಹೊತ್ತಿನಲ್ಲಿ ಸುನಿಲ್ ಕುಮಾರ್ ದೇಸಾಯಿ ನಿರ್ದೇಶನದ  ‘ಸ್ಪರ್ಶ’ ಚಿತ್ರ ಬಿಡುಗಡೆಯಾಗಿತ್ತು. ಆವತ್ತಿಗೆ ನಮ್ಮ ಮಟ್ಟಿಗೆ ಅತ್ಯದ್ಭುತ ಅನ್ನುವಂಥ ಸಂಗೀತ. ಅದರದ್ದೊಂದು ಕ್ಯಾಸೆಟ್ ರೆಕಾರ್ಡ್ ಮಾಡಿಸಿಕೊಂಡು ಬರಬೇಕು ಅಂತ ಹಳೆಯದ್ದೊಂದು ಕ್ಯಾಸೆಟ್ ಹಿಡಿದು ಹನ್ನೆರಡು ಕಿ.ಮೀ ಸೈಕಲ್ ಹೊಡೆದು ಎರಡೆರಡೂ ದಿನ ಸುತ್ತಿ, ಕಡೆಗೂ  ಕ್ಯಾಸೆಟ್ಟು ಕೈ ಸೇರಿತ್ತು.

‘ಚಂದಕ್ಕಿಂತ ಚಂದ ನೀನೆ ಸುಂದರ…’ ಹಾಡೆಂದರೆ ಪ್ರಾಣ ಬಿಡುವಷ್ಟು ಇಷ್ಟ. ಪಂಕಜ್ ಉದಾಸ್ ಅನ್ನುವ ಗಾಯಕನ ಹೆಸರು ನೆನಪಿನಲ್ಲಿ ಉಳಿದುಕೊಂಡಿದ್ದು ಇದೇ ಹಾಡಿನಿಂದ. ಹಾಡು ಅದೆಷ್ಟು ಮೆಚ್ಚುಗೆಯಾಗಿತ್ತು ಎಂದರೆ, ಗೆಳೆಯ ಇದನ್ನ ಬಿಡದೇ ಹಾಡಿ ಹಾಡಿ, ಕಡೆಗೆ ಅಪ್ಪಪಕ್ಕದವರಿಗೆಲ್ಲ ನಾವು ಈ ಹಾಡಿನಿಂದಲೇ ಜನಪ್ರಿಯವಾಗಿ, ಅವ ಅದನ್ನೇ ಕಾಲೇಜಿನ ಚಿತ್ರಗೀತೆ ಸ್ಪರ್ಧೆಯಲ್ಲೂ ಹಾಡಿ, ತೀರ್ಪುಗಾರರು ತಾಳಲಾರದೇ ಎಂಬಂತೆ ಬಹುಮಾನವನ್ನೇ ಘೋಷಿಸಿದ್ದು ಉಂಟು. ಆಗಂತೂ ನಮ್ಮ ಸಂಭ್ರಮಕ್ಕೆ ಎಲ್ಲೆ ಇರಲಿಲ್ಲ. ಚಿತ್ರದ ಬಹುತೇಕ ಹಾಡುಗಳು ಕಂಠಪಾಠ ಆಗಿದ್ದವು.

ಊರಿಗೊಂದೇ ವಾಕ್ ಮನ್ ಅನ್ನುವ ಕಾರಣಕ್ಕೋ ಏನೋ ನಮಗೆ ಈ ಎಲ್ಲದರ ಜೊತೆಗೇ ಕೊಂಚ ಲೆವಲ್ಲು, ಅಹಮ್ಮು ಎಲ್ಲ ಬಂದಿದ್ದು ಸುಳ್ಳಲ್ಲ. ಆಮೇಲೆ ಅದ್ಯಾಕೋ ಸ್ಪರ್ಶವೂ ಬೇಜಾರಿಡಿಸತೊಡಗಿ ಬೇರೆ ಹಾಡುಗಳಿಗಾಗಿ ಹುಡುಕಾಟ ನಡೆಸಿದೆವು. ಅದೇ ಹೊತ್ತಿಗೆ ಆಗ ಜನಪ್ರಿಯವಾಗುತ್ತಿದ್ದ ‘soldier’ ಅನ್ನುವ ಹಿಂದಿ ಸಿನಿಮಾ ಹಾಡುಗಳು ಸಿಕ್ಕು ಒಂದಿಷ್ಟು ದಿನ ಹಿಂದಿ ಹಾಡುಗಳನ್ನ ಗುನುಗುವಂತಾಯ್ತು.

ಆಮೇಲೆ ಅವನು ಪಿಯುಸಿ ಮುಗಿಸಿ ಡಿಗ್ರಿ ಓದಿಗೆ ಅಂತ ಮೈಸೂರಿಗೆ ಹೊರಟ. ಆಮೇಲೆ ನನ್ನ ರೀತಿನೀತಿಗಳೂ ಬದಲಾಗುತ್ತಾ ಹೋದವು.

ಅದೇ ಗೆಳೆಯ ನಿನ್ನೆ ಭಾನುವಾರ ಊರಿನಲ್ಲಿ ಮತ್ತೆ ಸಿಕ್ಕಿದ್ದ. ಆತನೀಗ ಹೈಸ್ಕೂಲೊಂದರಲ್ಲಿ ಟೀಚರ್. ಹೀಗೇ ಸಿಕ್ಕವರೇ ನೇರ ಬೈಕ್ ಏರಿ ಹೊಳೆಯತ್ತ ಹೋಗಿ, ದಡದಲ್ಲಿ ಕೂತು ಸಂಜೆಯಾಗುವವರೆಗೂ ಅದುಇದು ಅಂತ ಮಾತನಾಡುತ್ತ, ಕತ್ತಲಾದ ಮೇಲೆ ಊರ ಕಡೆ ಬಂದಿದ್ದೆವು.

ಇಲ್ಲಿ ಮತ್ತೆ ರೂಮಿಗೆ ಬಂದು, ರಾತ್ರಿ ಹನ್ನೆರಡರ ಹೊತ್ತಲ್ಲಿ, ಯಾವುದೋ ಹಾಡಿನ ಗುಚ್ಛಗಳ ನಡುವೆ ಅದೇ ಸ್ಪರ್ಶದ ಹಾಡುಗಳು ಸಿಕ್ಕು ಮತ್ತೆ ಹಳೆಯದ್ದೆಲ್ಲ ನೆನಪಾಗುತ್ತಿವೆ. ಮತ್ತೆ ಮೆಲುಕು ಹಾಕುವಂಥ ಗೀತೆಗಳು. ಹಂಸಲೇಖ ಇಂತಹದ್ದೊಂದು ಮಾಂತ್ರಿಕ ಸಂಗೀತ ಚಿತ್ರ ನೀಡಿದ್ದು ಅದೇ ಕೊನೆ ಇರಬೇಕು, ಆದಾದ ಮೇಲೆ ಹೇಳಿಕೊಳ್ಳುವಂತ ಸಂಗೀತ ಅವರಿಂದ ಬಂದಿಲ್ಲ ಅನ್ನಿಸುತ್ತೆ.

ಇದನ್ನೆಲ್ಲ ನೆನೆದು, ಮತ್ತೆ ಹಾಡು ಗುನುಗುತ್ತಾ ಹೊರಗೆ ಬಾಲ್ಕನಿಯಲ್ಲೊಮ್ಮೆ ಬಂದರೆ ಇಲ್ಲಿ ಕಗ್ಗತ್ತಲು. ಆದರೂ ತಣ್ಣನೆ ಮೈ ತಬ್ಬಿದಂತೆ ಬೀಸುವ ಗಾಳಿ ಹಾಯೆನಿಸುತ್ತಿದೆ. ‘ಈಗೀಗ ನೀನು ನಿಶಾಚರಿ ಆಗುತ್ತಿದ್ದೀಯಾ ಗುರುವೇ’ ಅಂತ ಗೆಳೆಯರು ಎಚ್ಚರಿಸುತ್ತಾ ಇರುವುದು ನೆನಪಿಗೆ ಬಂದು ಸಣ್ಣಗೊಂದು ನಗುವೂ ತೇಲುತ್ತಿದೆ.  ಹಾಗೇ ಗಾಳಿಗೆ ಮೈ ಒಡ್ಡಿಕೊಂಡೇ ನಿಂತಿದ್ದೇನೆ.

Entry Filed under: ಅರಳೀಕಟ್ಟೆ. Tags: , , .

2 Comments Add your own

  • 1. minchulli  |  March 2, 2009 at 8:18 am

    ನಮಸ್ತೆ.. ಸುಶ್ರುತ .. ಅಮ್ಮನ ಹಬ್ಬಕ್ಕೆ ಆಮಂತ್ರಿಸಲು ನಿಮ್ಮ ಮನೆಗೆ ಬಂದೆ.. ದಯವಿಟ್ಟು ಬಿಡುವು ಮಾಡಿಕೊಂಡು ಬನ್ನಿ.. ವಿವರಗಳಿಗೆ ನನ್ನ ಬ್ಲಾಗ್ http://minchulli.wordpress.com ನೋಡಿ. ಮರೆಯದೆ ಬನ್ನಿ… ನಿಮ್ಮ ಆಪ್ತರಿಗೆಲ್ಲ ಈ ವಿಚಾರ ಹೇಳಿ ಸಾಧ್ಯವಾದರೆ ಕರೆದುಕೊಂಡು ಬನ್ನಿ.

    ಶುಭವಾಗಲಿ,
    - ಶಮ, ನಂದಿಬೆಟ್ಟ

    Reply
  • 2. jomon  |  March 22, 2009 at 6:16 pm

    chennagide jitendra.

    Reply

Leave a Comment

Required

Required, hidden

Some HTML allowed:
<a href="" title=""> <abbr title=""> <acronym title=""> <b> <blockquote cite=""> <cite> <code> <pre> <del datetime=""> <em> <i> <q cite=""> <strike> <strong>

Trackback this post  |  Subscribe to the comments via RSS Feed


ಕಾಲಮಾನ

February 2009
M T W T F S S
« Dec   Sep »
 1
2345678
9101112131415
16171819202122
232425262728  

Archives

1356

ಬ್ಲಾಗ್ ಕೊಂಡಿ

ಇವರು ಹೀಗೆಂದರು..

jomon on ಬಹು ದಿನಗಳ ನಂತರ: ಒಂದು ಅನುವ…
ಶೆಟ್ಟರು (Shettaru) on ಬಹು ದಿನಗಳ ನಂತರ: ಒಂದು ಅನುವ…
jomon on ಮತ್ತೆ ಕೇಳಿದ ಹಾಡು, ಒಂದಿಷ್ಟು ಹಳೆ…
minchulli on ಮತ್ತೆ ಕೇಳಿದ ಹಾಡು, ಒಂದಿಷ್ಟು ಹಳೆ…
ಪ್ರದೀಪ್ on ಹೀಗೆ ಸುಮ್ಮನೆ ಒಂದು ಹನಿ

ಈಚೆಗೆ ಬರೆದಿದ್ದು

ಮುಗಿಲು ಮುಟ್ಟಿದವರು

ನೀವು ಮೆಚ್ಚಿದ್ದು- ಹೆಚ್ಚಿಗೆ ನೋಡಿದ್ದು

ಪಕ್ಷಿ ನೋಟ

Feeds